ರಹಿಮಾನ್ ಹತ್ಯೆ, ಕಾಂಗ್ರೆಸ್ ಪದಾಧಿಕಾರಿಗಳ ರಾಜೀನಾಮೆ : ಬೆದರಿಕೆಗಳಿಗೆ ಜಗ್ಗಲ್ಲ ಎಂದ ದಕ್ಷಿಣ ಕನ್ನಡ ಕಾಂಗ್ರೆಸ್!?

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಮತ್ತು ಸರ್ಕಾರ ವಿರುದ್ಧ ಮುಸ್ಲಿಂ ಮುಖಂಡರು ಆಕ್ರೋಶ ಹೊರಹಾಕುತ್ತಿದ್ದು, ಸಾಮೂಹಿಕ ರಾಜೀನಾಮೆ ನೀಡುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ಕೂಡಾ ಸಾಮೂಹಿಕ ರಾಜೀನಾಮೆಗೆ ಕರೆ ನೀಡಿದ್ದಾರೆ.
ರಾಜೀನಾಮೆ ಘಟನೆಯಿಂದ ವಿಚಲಿತವಾಗಿರುವ ಜಿಲ್ಲಾ ಕಾಂಗ್ರೆಸ್, ಕೊಲೆಯಾದವನು ಎಸ್ಡಿಪಿಐ ಪಕ್ಷದ ಕಾರ್ಯಕರ್ತ, ಕಾಂಗ್ರೆಸ್ ಕಾರ್ಯಕರ್ತರು ರಾಜೀನಾಮೆ ನೀಡುವುದರಲ್ಲಿ ಅರ್ಥವಿಲ್ಲ, ನಿಮ್ಮ ರಾಜೀನಾಮೆ ಬೆದರಿಕೆಗಳಿಗೆ ನಾವು ಬಗ್ಗುವುದಿಲ್ಲ ಎಂದು ಕಡ್ಡಿಮುರಿದಂತೆ ಹೇಳಿದೆ ಎನ್ನುವ ಸುದ್ದಿ ಕಾಂಗ್ರೆಸ್ ವಲಯದಲ್ಲಿ ಹರಿದಾಡುತ್ತಿದೆ. ಮುಂದುವರೆದು, ಪ್ರಕರಣದ ತನಿಖೆ ನಡೆಸಲು ನಮ್ಮ ಸರ್ಕಾರ ಸಮರ್ಥವಾಗಿದೆ. ಪ್ರಕರಣ ಬೇಧಿಸಲು ಪೊಲೀಸರಿಗೆ ಮುಕ್ತ ಸ್ವಾತಂತ್ರ್ಯ ಕಲ್ಪಿಸಲಾಗಿದ್ದು, ಸಾವಿಗೆ ನ್ಯಾಯ ಒದಗಿಸುತ್ತಾರೆ ಎಂದು ಕಡ್ಡಿ ಮುರಿದಂತೆ ಮುಸ್ಲಿಮ್ ಮುಖಂಡರಿಗೆ ತಿಳಿಸಿದ್ದಾರೆ ಎನ್ನಲಾಗಿದ್ದು, ಈ ಸುದ್ದಿಯ ಬೆನ್ನಲ್ಲೇ ಮುಸ್ಲಿಂ ಸಮುದಾಯ ಮತ್ತಷ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸುದ್ಧಿಯ ಖಚಿತತೆ ಇನ್ನಷ್ಟೇ ಆಗಬೇಕಿದೆ.
ಈಗಾಗಲೇ ಪುತ್ತೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಘಟಕದ ಉಪಾಧ್ಯಕ್ಷ ಸ್ಥಾನಕ್ಕೆ ಬಾತಿಶ್ ಅಳಕೆಮಜಲು, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಅಧ್ಯಕ್ಷ ಸ್ಥಾನಕ್ಕೆ ಉಬೈದುಲ್ಲಾ ಕೊಳಕೆ, ವಿಟ್ಲ ಉಪ್ಪಿನಂಗಡಿ ಕಾಂಗ್ರೆಸ್ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸಮದ್ ವಿಟ್ಲ, ಉಳ್ಳಾಲ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಶಮೀರ್, NSUI ಬೆಳ್ತಂಗಡಿ ಉಪಾಧ್ಯಕ್ಷ ಸ್ಥಾನಕ್ಕೆ ಸಲ್ಮಾನ್ ಫಾರೀಶ್, ಬೆಳ್ತಂಗಡಿ ಯುವ ಕಾಂಗ್ರೆಸ್ ಅಧ್ಯಕ್ಷ ಅನ್ಸಾಫ್ ಕರಾಯ, ವಿಟ್ಲ ಉಪ್ಪಿನಂಗಡಿ ಕಾಂಗ್ರೆಸ್ ಉಪಾಧ್ಯಕ್ಷ ಸ್ಥಾನಕ್ಕೆ ಉನೈಸ್ ಗಡಿಯಾರ ಸಹಿತ ಕಾಂಗ್ರೆಸ್ ನ ವಿವಿಧ ಘಟಕಗಳ ವಿವಿಧ ಹುದ್ದೆಗಳಿಗೆ ಮುಸ್ಲಿಂ ನಾಯಕರು ರಾಜೀನಾಮೆ ನೀಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಾಯಕರ ಈ ರಾಜೀನಾಮೆ ಪರ್ವ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಹೊಡೆತ ನೀಡಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.